ಮಂಗಳೂರು: ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ 23 ರಂದು ಸಂಜೆ ಸಮಯ ಸುಮಾರು 7ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ ಸಮಯ ಯಾರೋ ಕಳ್ಳರು ಚಿನ್ನಾಭರಣಗಳಿರುವ ಬ್ಯಾಗ್ ನ್ನು ಕಳವು ಮಾಡಿಕೊಂಡ ಹೋದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.
ಈ ಪ್ರಕರಣದ ಪತ್ತೆಯ ಕುರಿತು ವಿಶೇಷ ತಂಡವನ್ನು ರಚಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗದವರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್, ಪಿ.ಎಸ್.ಐ ಮತ್ತು ಸಿಬ್ಬಂದಿಗಳಾದ ಸುಜನ್, ವಾಸುದೇವ, ರವಿ ಲಮಾಣಿ, ಸಿದ್ದು, ಹರೀಶ್, ನಿತಿಶ್, ಗಾಲಿಬ್ ರವರೊಂದಿಗೆ, ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನಾದ ಮಹಮ್ಮದ್ ಇಮ್ರಾನ್ ಎನ್.ಎಮ್ (44 )ಎಂಬಾತನನ್ನು ಜ. 28 ರಂದು ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ನ ಬಳಿಯಲ್ಲಿ ದಸ್ತಗಿರಿ ಮಾಡಿ ಆರೋಪಿತನಿಂದ ಒಟ್ಟು ರೂ 6,47,920/- ಬೆಲೆಬಾಳುವ 46.28 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ರೂ.5000/- ನಗದು ಹಣವನ್ನು ಸ್ವಾಧೀನಪಡಿಸಲಾಗಿದೆ.
ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಜ. 29 ರಂದು ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿಯು ಬಸ್ಸು ನಿಲ್ದಾಣಗಳಲ್ಲಿ ಬೆಲೆಬಾಳುವ ಸೊತ್ತುಗಳಿರುವ ಬ್ಯಾಗ್ ಗಳನ್ನು ಕಳ್ಳತನ ಮಾಡುವ ರೂಢಿಗತ ಆರೋಪಿಯಾಗಿದ್ದು ಹಾಗೂ ಈತನ ಮೇಲೆ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿತನ ಮೇಲೆ ದುದ್ದ ಪೊಲೀಸ್ ಠಾಣೆಯಲ್ಲಿ-1, ಕೊಮನೂರು ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ-1, ಹಾಸನ ನಗರ ಪೊಲೀಸ್ ಠಾಣೆಯಲ್ಲಿ-1, ಚೆನ್ನರಾಯಪಟ್ಟಣ ನಗರ ಠಾಣೆಯಲ್ಲಿ-1, ಮೈಸೂರು ದೇವರಾಜ ನಗರ ಪೊಲೀಸ್ ಠಾಣೆಯಲ್ಲಿ-1 ಬ್ಯಾಗ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಹಾಸನ ಜಿಲ್ಲೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ -2, ಹಾಸನ ಜಿಲ್ಲೆ ದುದ್ದ ಪೊಲೀಸ್ ಠಾಣೆಯಲ್ಲಿ-1 ಮನೆ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.ಅಲ್ಲದೇ ಆರೋಪಿತನು ಹಾಸನ ಜಿಲ್ಲೆಯ ಮನೆಕಳವು ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಮಾನ್ಯ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಮಾನ್ಯ ನ್ಯಾಯಾಲಯವು ಆರೋಪಿತನ ವಿರುದ್ದ ವಾರೆಂಟ್ ನ್ನು ಕೂಡಾ ಹೊರಡಿಸಿರುತ್ತಾರೆ. ಎಂದು ವರದಿ ಮೂಲಕ ತಿಳಿದು ಬಂದಿದೆ.




