ಮಂಗಳೂರು: ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕೊಡಮಾಡುವ ಅವ್ವ ಫೌಂಡೇಶನ್ ಹುಬ್ಬಳಿ ವತಿಯಿಂದ ನೀಡುವ ದತ್ತಿನಿಧಿ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘಟದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ. ಮೇ 3ರಂದು ಕಾಸರಗೋಡು ಜಿಲ್ಲೆಯ, ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸುಮಾರು 2 ದಶಕಗಳ ಸೇವೆಯಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಕೇರಳದಲ್ಲಿ ಜನಮನ್ನಣೆಗೆ ಪಾತ್ರವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಇಲ್ಲಿನ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಇತರ ಕನ್ನಡಪರ ಸಂಘ ಸಂಸ್ಥೆಗಳೊಂದಿಗೆ ಸೇರಿ ಶ್ರಮಿಸುತ್ತಿದೆ. ಕನ್ನಡ ಮತ್ತು ಮಲೆಯಾಳ ಪತ್ರಕರ್ತರ ಸ್ನೇಹಸೇತುವಾಗಿ ಈ ಸಂಘವು ಕಾರ್ಯಾಚರಿಸುತ್ತಿದೆ.
ಸಂಘವು ವಾರ್ಷಿಕವಾಗಿ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನಿಸುತ್ತಿದ್ದು, ಈ ಬಾರಿಯ ಅವ್ವ ಫೌಂಡೇಶನ್ ಹುಬ್ಬಳಿ ನೀಡುವ ದತ್ತಿನಿಧಿ ಪ್ರಶಸ್ತಿಗೆ ಶ್ರೀನಿವಾಸ ನಾಯಕ್ಇಂದಾಜೆ ಅವರನ್ನು ಆಯ್ಕೆ ಮಾಡಲಾಗಿದೆ. ದತ್ತಿನಿಧಿ ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ ಸ್ಮರಣಿಕೆ ಹೊಂದಿರುತ್ತದೆ. ಬರುವ ತಿಂಗಳು ಮೇ 03 ರಂದು ಕಾಸರಗೋಡು ಜಿಲ್ಲೆಯ, ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಕೆ. ಕೆ ಶೆಟ್ಟಿ ಕುತ್ತಿಕಾರ್ ಇವರ ಅಧ್ಯಕ್ಷತೆಯಲ್ಲಿ ಇದರ ಸಮಾರಂಭ ನಡೆಯಲಿದೆ.
ಈ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕದ ಕೃಷಿ ಸಚಿವ ಚೆಲುವರಾಯ ಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮುಂತಾದ ಗಣ್ಯರು ಸೇರಿ ಪ್ರಶಸ್ತಿ ಪ್ರದಾನಿಸಲಿದ್ದಾರೆ.