ಕಾಸರಗೋಡು: ಸಹಪಾಠಿಗಳ ಜೊತೆ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿ ಸಮೀಪದ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ಬಾಡೂರು ಸಮೀಪದ ಓಣಿಬಾಗಿಲು ಎಂಬಲ್ಲಿ ನಡೆದಿದೆ.

ಮೃತಪಟ್ಟ ಬಾಲಕಿಯನ್ನು ಓಣಿಬಾಗಿಲು ವಿನ ಮುಹಮ್ಮದ್ – ಖದೀಜತ್ ಕುಬ್ರಾ ದಂಪತಿ ಪುತ್ರಿ ಫಾತಿಮಾ ಹಿಬಾ ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸಹಪಾಠಿಗಳ ಜೊತೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದು ಈ ದುರ್ಘಟನೆ ನಡೆದಿದೆ. ಜೊತೆಗಿದ್ದ ಮಕ್ಕಳ ಬೊಬ್ಬೆ ಕೇಳಿ ಮನೆಯವರು ಹಾಗೂ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ ಬಾಲಕಿಯನ್ನು ಮೇಲಕ್ಕೆತ್ತಿ ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ.
ಬಾಲಕಿಯ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ಬಾಲಕಿ ಬಾಡೂರು ಪದವು ಎ. ಎಲ್. ಪಿ ಶಾಲೆಯ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.