Facebook Twitter Instagram
    Tuesday, March 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
    ಇತ್ತೀಚಿನ ಸುದ್ದಿ

    ಮಂಗಳೂರಿನ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    March 17, 2026
    Share

    ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ ಉತ್ಕೃಷ್ಟ ಕೃತಿಗಳನ್ನು ಆಯ್ದು ಈ ಪುರಸ್ಕಾರ ನೀಡಲಾಗುತ್ತದೆ.

    ಕೊಂಕಣಿ ಭಾಷೆಯು 1992 ರಿಂದ ಅನುಸೂಚಿತ ಭಾಷೆಯಾಗಿದ್ದು, ಗೋವಾ, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಗುಜರಾತ್ ಐದು ರಾಜ್ಯಗಳಲ್ಲಿ ಪ್ರಚಲಿತವಾಗಿರುವ ಕೊಂಕಣಿ ಭಾಷೆಗೆ 1975 ರಲ್ಲಿ ಸಾಹಿತ್ಯ ಅಕಾಡೆಮಿಯಿಂದ ಮಾನ್ಯತೆ ದೊರಕಿತ್ತು. 1977 ರಿಂದ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷೆಯ ಕೃತಿಗಳಿಗೂ ಪ್ರಶಸ್ತಿ ನೀಡುತ್ತಾ ಬಂದಿದ್ದು, ಈ ಹಿಂದೆ ಮಂಗಳೂರಿನ ಚಾ. ಫ್ರಾ. ದೆಕೊಸ್ತಾ (1992) ಮತ್ತು ಮೆಲ್ವಿನ್ ರೊಡ್ರಿಗಸ್(2011) – ಕವನ ಸಂಕಲನಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದರೆ, 2016 ರಲ್ಲಿ ಎಡ್ವಿನ್ ಜೆ.ಎಫ್.ಡಿ. ಸೊಜಾ ಕಾದಂಬರಿಗಾಗಿ – ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು. ಎಚ್. ಎಂ. ಪೆರ್ನಾಲ್ ಅವರು ಈ ಪರಂಪರೆಯನ್ನು ಮುಂದುವರೆಸುತ್ತಿರುವ ಕರ್ನಾಟಕದ ನಾಲ್ಕನೇ ಕೊಂಕಣಿ ಸಾಹಿತಿಯಾಗಿದ್ದಾರೆ.

    ಪೆರ್ನಾಲ್ ಅವರ ಪ್ರಸ್ತುತ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ ಕೃತಿಯು ಸಾಹಿತ್ಯ ವಿಮರ್ಶೆ ವಿಭಾಗದಲ್ಲಿ ಪ್ರಶಸ್ತಿ ಪಡೆದ ಮೊದಲ ಕೊಂಕಣಿ ಕೃತಿ ಎಂಬ ಐತಿಹಾಸಿಕ ಮೈಲುಗಲ್ಲನ್ನು ಸೃಷ್ಟಿಸಿದೆ. ಈ ಕೃತಿಗೆ ಮೊದಲು 2021 ರಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಮತ್ತು 2023 ರಲ್ಲಿ ಗೋವಾ ಕೊಂಕಣಿ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಲಭಿಸಿತ್ತು. ಈ ಪುಸ್ತಕಕ್ಕೆ ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ್ ಮೌಜೋ ಅವರ ವಿಸ್ತೃತ ಮುನ್ನುಡಿ ಬರೆದಿದ್ದು, ಮಂಗಳೂರಿನ ಕವಿತಾ ಪಬ್ಲಿಕೇಷನ್ಸ್ ಈ ಪುಸ್ತಕವನ್ನು ಪ್ರಕಟಿಸಿದ್ದಾರೆ.

    ಉಡುಪಿ ಜಿಲ್ಲೆಯ ಪೆರ್ನಾಲ್ ನಲ್ಲಿ ಹುಟ್ಟಿ, ಶಿರ್ವದ ಹಿಂದೂ ಜೂನಿಯರ್ ಕಾಲೇಜು ಮತ್ತು ಎಂ.ಎಸ್.ಆರ್.ಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ, ಮುಂಬಯಿಯಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿರುವ ಹೆನ್ರಿ ಮೆಂಡೋನ್ಸಾ ವೃತ್ತಿಯಲ್ಲಿ ಕಮರ್ಶಿಯಲ್ ಎಕಾಂವ್ಟೆಂಟ್. ಕನ್ನಡದಲ್ಲಿ – ತರಂಗ, ಸಂಕ್ರಮಣ,ಶೂದ್ರ ಮುಂತಾದ ಪತ್ರಿಕೆಗಳ ಮೂಲಕ ಬರವಣಿಗೆ ಆರಂಭಿಸಿದ ಅವರು 1980 ರ ದಶಕದ ಆರಂಭದಲ್ಲಿ ಯುವಕ್ ಮಾಸಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಕೊಂಕಣಿಗೆ ಪಾದಾರ್ಪಣೆ ಮಾಡಿ ಪ್ರಸ್ತುತ – ಕಥೆಗಾರ, ಕವಿ, ವಿಮರ್ಶಕ, ಸಂಪಾದಕ, ಪ್ರಕಾಶಕರಾಗಿ ತಮ್ಮದೇ ಛಾಪು ಮೂಡಿಸಿರುತ್ತಾರೆ. 2011 ರಲ್ಲಿ ಅವರು ಸ್ಥಾಪಿಸಿದ ಕಿಟಾಳ್ ಸಾಹಿತ್ಯಿಕ ಅಂತರ್ಜಾಲ ಪತ್ರಿಕೆ ಹಿರಿ – ಕಿರಿಯ ಲೇಖಕರನ್ನೊಳಗೊಂಡು ಸತತ ಹದಿನಾಲ್ಕನೇ ವರ್ಷದಲ್ಲಿ ನಿರಂತರವಾಗಿ ಪ್ರಕಟವಾಗುತ್ತಿದ್ದು, ಡಿಜಿಟಲ್ ಕೊಂಕಣಿ ಸಾಹಿತ್ಯ ನಿರ್ಮಿತಿಯಲ್ಲಿ ಮುಂಚೂಣಿಯಲ್ಲಿದೆ. 2013 ರಲ್ಲಿ ಪಾಕ್ಷಿಕವಾಗಿ ಆರಂಭಿಸಿದ ಆರ್ಸೊ ಸಾಹಿತ್ಯ ಪತ್ರಿಕೆ ಪ್ರಸ್ತುತ ಕವಿ ವಿಲ್ಸನ್ ಕಟೀಲ್ ಸಂಪಾದಕತ್ವದಲ್ಲಿ ಮಾಸಪತ್ರಿಕೆಯಾಗಿ ಹನ್ನೆರಡನೇ ವರ್ಷದಲ್ಲಿ ಪ್ರಕಟವಾಗುತ್ತಿದ್ದು, ಆರ್ಸೊ ವಾರ್ಷಿಕ ವಿಶೇಷಾಂಕಗಳಿಗೆ ಸಾಹಿತ್ಯ ವಿಶ್ವದಲ್ಲಿ ವಿಶೇಷ ಮಾನ್ಯತೆಯಿದೆ. ತಮ್ಮದೇ ಕಿಟಾಳ್ ಪ್ರಕಾಶನ ದ ಮೂಲಕ ಈ ವರೆಗೆ 15 ಕ್ಕೂ ಮಿಕ್ಕಿ ಮೌಲಿಕ ಸಾಹಿತ್ಯ ಕೃತಿಗಳನ್ನೂ ಪೆರ್ನಾಲ್ ಪ್ರಕಟಿಸಿದ್ದಾರೆ.

    ಈ ವರೆಗೆ ಪೆರ್ನಾಲ್ ಅವರ ನಾಲ್ಕು ಕವನ ಸಂಕಲನಗಳು — ಚಲ್ಯಾಂಕ್ ಚತ್ರಾಯ್ (1999), ಕಯ್ದ್ಯಾಚ್ಯೊ ಕವಿತಾ (2004), ಭಾಮುಣಾಂಚೆಂ ಚೆಡುಂ (2006) ಮತ್ತು ಜನೆಲ್ (2025), ಎರಡು ಕಥಾ ಸಂಕಲನಗಳು — ದೆವಾಕ್ ಸೊಡುಲ್ಲೊ ಪಾಡೊ(2002) ಮತ್ತು ಬೀಗ್ ಆನಿ ಬಿಗಾತ್ (2016) ಹಾಗೂ ಪ್ರಶಸ್ತಿ ವಿಜೇತ ಸಾಹಿತ್ಯ ವಿಮರ್ಶೆಯ ಕೃತಿ ಕೊಂಕಣಿ ಕಾವ್ಯೆಂ : ರುಪಾಂ ಆನಿ ರೂಪಕಾಂ (2021) ಪ್ರಕಟವಾಗಿವೆ.

    ಅವರ ಬೀಗ್ ಆನಿ ಬಿಗಾತ್‌ಕಥಾ ಸಂಕಲನಕ್ಕೆ ವಿಶ್ವ ಕೊಂಕಣಿ ಕೇಂದ್ರದ – ಖ್ಯಾತ ಉದ್ಯಮಿ ಟಿ. ವಿ. ಮೋಹನದಾಸ ಪೈ – ತಾಯಿಯ ಹೆಸರಿನಲ್ಲಿ ಕೊಡಮಾಡುವ ಶ್ರೀಮತಿ ವಿಮಲಾ ವಿ ಪೈ ಅತ್ಯುತ್ತಮ ಸಾಹಿತ್ಯ ಕೃತಿ ಪ್ರಶಸ್ತಿ (2017), ಕೊಂಕಣಿ ಕಾವ್ಯಕ್ಕೆ ನೀಡಿರುವ ಕೊಡುಗೆಗೆ , ಕವಿತಾ ಟ್ರಸ್ಟ್ ನೀಡುವ ಮಥಾಯಸ್ ಕುಟುಂಬ ದತ್ತಿ ಕಾವ್ಯ ಪ್ರಶಸ್ತಿ (2018), ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಕೊಂಕಣಿ ಕಾವ್ಯೆಂ : ರುಪಾಂ ಆನಿ ರೂಪಕಾಂ ಪುಸ್ತಕಕ್ಕೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ (2021), ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಕೊಂಕಣಿ ಸಾಹಿತ್ಯ ಗೌರವ ಪ್ರಶಸ್ತಿ (2022), ಕೊಂಕಣಿ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ (2023) ಮತ್ತು ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ ಪುಸ್ತಕಕ್ಕೆ ಗೋವಾ ಕೊಂಕಣಿ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ (2023) ಲಭಿಸಿರುತ್ತದೆ.

    850 ಕ್ಕೂ ಹೆಚ್ಚು ಕವಿತೆಗಳು, 100 + ಕಥೆಗಳು ಮತ್ತು 2,000 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಪೆರ್ನಾಲ್ ಅವರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕೊಂಕಣಿ ಸಾಹಿತ್ಯವನ್ನು ಪೋಷಿಸುತ್ತಾ ಬಂದಿದ್ದು, 2012 ರಿಂದ ಉದಯೋನ್ಮುಖ ಬರಹಗಾರರನ್ನು ಗುರುತಿಸಿ ಪ್ರತೀ ವರ್ಷ ಅಬುದಾಬಿಯ ಉದ್ಯಮಿ, ದಾನಿ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರವನ್ನು ನೀಡುತ್ತಾ ಬಂದಿರುತ್ತಾರೆ. ಈ ಪ್ರಶಸ್ತಿಯು ಸನ್ಮಾನ ಪತ್ರ ಮತ್ತು ರು. 25,000/- ನಗದನ್ನು ಒಳಗೊಂಡಿರುತ್ತದೆ. ಪ್ರಸ್ತುತ ಮೈಕಲ್ ಡಿಸೋಜಾ ವಿಷನ್ ಕೊಂಕಣಿ ಪುಸ್ತಕ ಅನುದಾನ ಯೋಜನೆಯ ಪ್ರಧಾನ ಸಂಪಾದಕರಾಗಿದ್ದು, ಕೊಂಕಣಿ ಲೇಖಕ / ಲೇಖಕಿಯರಿಗೆ ತಮ್ಮ ಕೃತಿಯ ಮುದ್ರಣಕ್ಕಾಗಿ ಪುಸ್ತಕವೊಂದಕ್ಕೆ ರು. 40,000/- ವರೆಗೆ ಅನುದಾನ ನೀಡಲಾಗುತ್ತಿದೆ. ₹ 40 ಲಕ್ಷ ವೆಚ್ಚದ ಈ ಯೋಜನೆಯ ಸಂಪೂರ್ಣ ಖರ್ಚನ್ನು ಅನಿವಾಸಿ ಉದ್ಯಮಿ ಮತ್ತು ಕೊಂಕಣಿ ಭಾಷಾಭಿಮಾನಿ, ಮಹಾದಾನಿ ಶ್ರೀ ಮೈಕಲ್ ಡಿಸೋಜಾ ಪ್ರಾಯೋಜಿಸಿದ್ದು – ವಿಶ್ವ ಕೊಂಕಣಿ ಕೇಂದ್ರದ ಉಸ್ತುವಾರಿಯಲ್ಲಿ 5 ವರ್ಷಗಳ ಅವಧಿಗೆ 100 ಪುಸ್ತಕ ಪ್ರಕಟಣೆಯ ಗುರಿಯನ್ನು ಈ ಯೋಜನೆ ಹೊಂದಿರುತ್ತದೆ.

    ಕೊಂಕಣಿ ಸಾಹಿತ್ಯ ಸಮುದಾಯದಲ್ಲಿ ಸಮರ್ಪಿತ ನಾಯಕರಾಗಿರುವ ಪೆರ್ನಾಲ್ ಅವರು 2023 ರಲ್ಲಿ ಮಂಗಳೂರಿನಲ್ಲಿ ನಡೆದ ಅಖಿಲ ಭಾರತ ರಜತ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅಖಿಲ ಭಾರತ ಕೊಂಕಣಿ ಪರಿಷತ್‌ನಲ್ಲಿ ಕೋಶಾಧಿಕಾರಿಯಾಗಿದ್ದಾರೆ. ಅವರು ಕೊಂಕಣಿ ಲೇಖಕರ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು ಪ್ರಸ್ತುತ ಸಾಹಿತ್ಯ ಅಕಾಡೆಮಿಯ ಕೊಂಕಣಿ ಭಾಷಾ ಸಲಹಾ ಮಂಡಳಿಯ ಸದಸ್ಯರಾಗಿದ್ದಾರೆ.

    Post Views: 11

    Related Posts

    ಮೂಡಬಿದ್ರೆ ಇನ್ಸ್‌ಪೆಕ್ಟರ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ

    March 17, 2026

    ಬಂಟ್ವಾಳ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

    March 17, 2026

    ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ : ಸಿಎಂ ಸೂಚನೆ ಮೇರೆಗೆ ಸಸ್ಪೆಂಡ್

    March 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.