ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಪೊಲೀಸರು ಪತ್ತೆಹಚ್ಚಿ, 20 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಏಪ್ರಿಲ್ 3ರಂದು ಮುಂಜಾನೆ ನಡೆದಿದೆ.
ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಕಂಟೈನರ್ ಲಾರಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಜಂಬುರಾಜ್ ಮಹಾಜನ್ ಪೊಲೀಸ್ ಉಪನಿರೀಕ್ಷಕರು ಕಡಬ ಪೊಲೀಸ್ ಠಾಣೆ ಸಿಬ್ಬಂದಿಗಳೊಂದಿಗೆ ನೂಜಿಬಾಳ್ತಿಲ ಗ್ರಾಮದ ಕನ್ವರೆ ಪ್ರದೇಶದಲ್ಲಿ ದಾಳಿ ನಡೆಸಿದರು.
ಈ ವೇಳೆ KA 11 B 9413 ನೋಂದಣಿಯ ಕಂಟೈನರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಯಿತು. ಲಾರಿಯಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ, ಆತ ಹಾಸನ ಜಿಲ್ಲೆಯ ಬೇಲೂರು ನಿವಾಸಿ ಇರ್ಫಾನ್ (26) ಎಂದು ತಿಳಿದುಬಂದಿದೆ.ಜಾನುವಾರು ಸಾಗಾಟಕ್ಕೆ ಸಂಬಂಧಿಸಿದಂತೆ ಯಾವುದೇ ಪರವಾನಿಗೆ ಇಲ್ಲದೇ, ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
ಪೊಲೀಸರು ಲಾರಿ ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 36/2026 ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ The Karnataka Prevention of Slaughter and Preservation of Cattle Act, 2020 ರ ಕಲಂ 4, 7, 12 ಹಾಗೂ Prevention of Cruelty to Animals Act, 1960 ರ ಕಲಂ 4, 11 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.




