ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿತನದಿಂದಾಗಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವ ಘಟನೆ ಸೋಮವಾರ ವರದಿಯಾಗಿದೆ.
ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತ ದುರ್ದೈವಿ. ಎರಡು ತಿಂಗಳ ಹಿಂದೆಯಷ್ಟೇ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ, ಕುಟುಂಬ ನಿಯಂತ್ರಣಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸ್ತ್ರೀರೋಗ ತಜ್ಞೆ ಆಕಸ್ಮಿಕವಾಗಿ ಸಣ್ಣ ಕರಳನ್ನು ಕತ್ತರಿಸಿದ್ದಾರೆ ಎಂಬುದು ಕುಟುಂಬಸ್ಥರ ಗಂಭೀರ ಆರೋಪವಾಗಿದೆ. ಈ ಎಡವಟ್ಟಿನಿಂದಾಗಿ ದೇಹದಾದ್ಯಂತ ಸೋಂಕು ಹರಡಿ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ಮತ್ತು ಗ್ರಾಮಸ್ಥರು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನ್ಯಾಯ ಕೋರಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಆರೋಪದ ಕುರಿತು ಪ್ರತಿಕ್ರಿಯಿಸಿರುವ ವೈದ್ಯರು “ಶಸ್ತ್ರಚಿಕಿತ್ಸೆ ವೇಳೆ ಕರಳು ಅಂಟಿಕೊಂಡಿದ್ದರಿಂದ ಸಣ್ಣ ಪ್ರಮಾಣದ ಹಾನಿಯಾಗಿತ್ತು. ತಕ್ಷಣವೇ ಹಿರಿಯ ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲಾಗಿತ್ತು. ಮೂರು ದಿನಗಳ ಹಿಂದೆಯೇ ಅವರು ಗುಣಮುಖರಾಗಿ ಮನೆಗೆ ತೆರಳಿದ್ದರು. ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಯಲಿದೆ” ಎಂದಿದ್ದಾರೆ.




