ಇನ್ನು ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಬೆಳಗಾವಿ ಕಮಿಷನರ್ ಕಚೇರಿಯಲ್ಲಿ ಇಂದು ಸಿಐಡಿ ಡಿಐಜಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ಸ್ಥಳೀಯ ಅಧಿಕಾರಿಗಳ ಜೊತೆ 2 ಗಂಟೆ ಕಾಲ ಸಭೆ ಮಾಡಿದರು. ನೀಲಣ್ಣವರ್ ಕೇಸ್ಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅಧಿಕೃತವಾಗಿ ಸಿಐಡಿಗೆ ಹಸ್ತಾಂತರಿಸಿದರು. ನಿನ್ನೆವರೆಗೆ ನಡೆಸಿದ ತನಿಖಾ ವರದಿ ಸೇರಿದಂತೆ ಎಲ್ಲಾ ಮಹತ್ವದ ದಾಖಲೆಗಳನ್ನು ಹಸ್ತಾಂತರಿಸಲಾಗಿದೆ. ಪ್ರಕರಣದ ಬಗ್ಗೆ ಸುದೀರ್ಘವಾಗಿ ಮಾಹಿತಿ ಪಡೆದ ಸಿಐಡಿ ತಂಡ ಬಳಿಕ ಬೆಂಗಳೂರಿಗೆ ತೆರಳಿತು.
ಕಮಿಷನರ್ ಭೂಷಣ್ ಬೊರಸೆ ಹೇಳಿದ್ದಿಷ್ಟು
ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಮಿಷನರ್ ಭೂಷಣ್ ಬೊರಸೆ, ಶಿವಂ ಅಸೋಸಿಯೇಟ್ ಮಾಲೀಕ ಶಿವಾನಂದ ನೀಲಣ್ಣವರ್ ಬಂಧನವಾಗಿದೆ. ಈ ಪ್ರಕರಣದ ವ್ಯಾಪ್ತಿ ಅಂತಾರಾಜ್ಯಕ್ಕೂ ವ್ಯಾಪಿಸಿದೆ. 50 ಕೋಟಿ ರೂಪಾಯಿಗೂ ಹೆಚ್ಚು ಅವ್ಯವಹಾರ ಆಗಿದೆ. ಈ ಕಾರಣಕ್ಕೆ ಡಿಜಿ-ಐಜಿಪಿ ಕೇಸ್ ಸಿಐಡಿಗೆ ವಹಿಸಿದ್ದಾರೆ. ಸಿಐಡಿ ಡಿಐಜಿ ಬಂದು ನಮ್ಮ ಬಳಿ ಮಾಹಿತಿ ಪಡೆದಿದ್ದಾರೆ. ನಾವು ಮಾಡಿರುವ ತನಿಖೆ ಅವರಿಗೆ ನೀಡಿದ್ದೇವೆ. ಅದರ ಆಧಾರದ ಮೇಲೆ ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಸಿಐಡಿ ಡಿಐಜಿ ಅವರು ಫಾರ್ಮಾಲಿಟಿ ಮುಗಿಸಿಕೊಂಡು ಹೋಗಿದ್ದಾರೆ. ಸ್ಥಳೀಯ ಅಧಿಕಾರಿಗಳು ಕಲೆ ಹಾಕಿರುವ ಮಾಹಿತಿಯನ್ನ ಸಂಗ್ರಹಿಸಿದ್ದಾರೆ ಎಂದು ಹೇಳಿದರು.




