ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಶಿಕೋಹಾಬಾದ್ನಲ್ಲಿ ಇಡೀ ದೇಶವೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರೇಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಒಂದೂವರೆ ವರ್ಷದ ಅಮಾಯಕ ಮಗುವನ್ನು ಬೀದಿಯಲ್ಲಿ ಕ್ರೂರವಾಗಿ ಥಳಿಸಿ ಕೊಂದ ದೃಶ್ಯ ಸಿಸಿಟಿವಿಯಲ್ಲಿ ವೈರಲ್ ಆಗಿ ತೀವ್ರ ಆಕ್ರೋಶ ಮೂಡಿಸಿತ್ತು. ಇದೀಗ ಕೊಲೆಯ ಪ್ರಮುಖ ಆರೋಪಿಯನ್ನು ಪೊಲೀಸರು ಭೀಕರ ಎನ್ಕೌಂಟರ್ ನಡೆಸಿ ಬಂಧಿಸಿದ್ದಾರೆ. ಮುಖಾಮುಖಿ ಗುಂಡಿನ ಚಕಮಕಿಯಲ್ಲಿ ಆರೋಪಿಯ ಎರಡೂ ಕಾಲುಗಳಿಗೆ ಗುಂಡು ತಗುಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಧಿತ ಆರೋಪಿಯನ್ನು ಶಿಕೋಹಾಬಾದ್ ಪ್ರದೇಶದಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ವಿರಾಜ್ ಅಲಿಯಾಸ್ ಜಿತೇಂದ್ರ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಶುಕ್ರವಾರ ಮಗುವಿನ ತಾಯಿ ತನ್ನ ಸಂಬಂಧಿಕರೊಬ್ಬರನ್ನು ಭೇಟಿ ಮಾಡಲು ಹೋಗಿದ್ದ ಸಂದರ್ಭವನ್ನು ಬಳಸಿಕೊಂಡ ಆರೋಪಿ, ಮಗುವಿಗೆ ಚಾಕಲೇಟ್ ಕೊಡುವ ನೆಪದಲ್ಲಿ ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಅತ್ಯಂತ ಕ್ರೂರವಾಗಿ ಮಗುವನ್ನು ರಸ್ತೆಯ ಮೇಲೆ ಎಸೆದು, ಥಳಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಸಾಗಿಸಿದರಾದರೂ, ವೈದ್ಯರು ಮಗು ಈಗಾಗಲೇ ಮೃತಪಟ್ಟಿದೆ ಎಂದು ಘೋಷಿಸಿದರು. ಈ ಇಡೀ ಭೀಕರ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಪೊಲೀಸ್ ವಿಚಾರಣೆಯ ವೇಳೆ ಆರೋಪಿ ತನ್ನ ಘೋರ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಮಗುವಿನ ತಾಯಿಯೊಂದಿಗೆ ತನಗೆ ಅನೈತಿಕ ಸಂಬಂಧವಿತ್ತು ಮತ್ತು ಆಕೆ ತನಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಳು ಎಂದು ಆರೋಪಿಸಿದ್ದಾನೆ. ಆದರೆ ಮೃತ ಮಗುವಿನ ತಾಯಿ ನೀಡಿರುವ ಹೇಳಿಕೆ ಪ್ರಕಾರ, “ಆರೋಪಿ ವಿರಾಜ್ ನನ್ನನ್ನು ಮದುವೆಯಾಗಲು ಒತ್ತಾಯಿಸುತ್ತಿದ್ದ. ಆದರೆ ನನ್ನ ಮಗು ಆತನ ಮದುವೆಯ ಆಸೆಗೆ ಅಡ್ಡಿಯಾಗಿದೆ ಎಂದು ಭಾವಿಸಿ, ಈ ಕ್ರೂರ ಕೊಲೆ ಮಾಡಿದ್ದಾನೆ” ಎಂದು ಕಣ್ಣೀರಿಟ್ಟಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಇಡೀ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ಆರಂಭಿಸಿದರು. ಈ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ ವಿರಾಜ್, ಪೊಲೀಸರ ಮೇಲೆಯೇ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪ್ರತಿಯಾಗಿ ಪೊಲೀಸರು ಆತ್ಮರಕ್ಷಣೆಗಾಗಿ ನಡೆಸಿದ ಎನ್ಕೌಂಟರ್ನಲ್ಲಿ ಆರೋಪಿಯ ಎರಡೂ ಕಾಲುಗಳಿಗೆ ಗುಂಡು ಹಾರಿಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಯ ಬಳಿಯಿಂದ ಒಂದು .315-ಬೋರ್ ಪಿಸ್ತೂಲ್, ಐದು ಜೀವಂತ ಕಾರ್ಟ್ರಿಡ್ಜ್ಗಳು ಹಾಗೂ ಎರಡು ಬಳಸಿದ ಬುಲೆಟ್ ಕವಚಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲೆ ಆರೋಪಿಯನ್ನು ಎನ್ಕೌಂಟರ್ ನಡೆಸಿ ಬಂಧಿಸಲಾಗಿದೆ ಎಂದು ನಗರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ರವಿಶಂಕರ್ ಪ್ರಸಾದ್ ತಿಳಿಸಿದ್ದು, ತನಿಖೆ ಮುಂದುವರಿದಿದೆ.




