ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ಶಾಲಿನಿ ರಜನೀಶ್ ಆದೇಶದಲ್ಲಿ ತಿಳಿಸಿದ್ದಾರೆ. ಸಿಎಂ ಡಿ.ಕೆ ಶಿವಕುಮಾರ್ ಅವರ ಸೂಚನೆ ಮೇರೆ ಆದೇಶ ಹೊರಡಿಸಿದ್ದಾರೆ.ಮುಖ್ಯಮಂತ್ರಿಗಳು ಜೂನ್ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ `ಕರ್ತವ್ಯ App’ ನಲ್ಲಿ ಈಗಾಗಲೇ HRMS ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ವರ್ಗದ ಮಾಹಿತಿಯನ್ನ ನೋಂದಾಯಿಸಲಾಗಿದೆ. ಆದ್ರೆ ಬಳಷ್ಟು ಅಧಿಕಾರಿ/ಸಿಬ್ಬಂದಿಗಳು ಈ ತಂತ್ರಾಂಶವನ್ನ (App) ನಿರಂತರವಾಗಿ ಬಳಸುತ್ತಿಲ್ಲದಿರುವುದು ಕಂಡುಬಂದಿದೆ. ಆದ್ದರಿಂದ ಈ ನಿರ್ದೇಶನ ತಪ್ಪದೇ ಪಾಲಿಸಲು ಸೂಚಿಸಲಾಗಿದೆ.ಸರ್ಕಾರದ ನಿರ್ದೇಶನಗಳೇನು?ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಗ್ಗೆ 10 ಗಂಟೆಗೆ ʻಕರ್ತವ್ಯ ಆ್ಯಪ್ʼ ನಲ್ಲಿ ಹಾಜರಾತಿಯನ್ನು Check In ನಲ್ಲಿ ಹಾಗೂ ಕಚೇರಿಯಿಂದ ನಿರ್ಗಮಿಸುವಾಗ Check Out ನಲ್ಲಿ ಕರ್ತವ್ಯ ಆ್ಯಪ್ ಬಳಸುವ ವಿಧಾನಗಳನ್ನ ವೀಕ್ಷಣೆ ಮಾಡುವುದು.ಇ-ಆಡಳಿತ ಇಲಾಖೆಯು ಪ್ರತಿದಿನ ಬೆಳಗ್ಗೆ 10 ಗಂಟೆಗೆ ಹಾಜರಾತಿ ದಾಖಲಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಜಿಲ್ಲಾವಾರು ಹಾಗೂ ಕಚೇರಿವಾರು ಮಾಹಿತಿಯನ್ನ AI (ಕೃತಕ ಬುದ್ಧಿಮತ್ತೆ) ಆ್ಯಪ್ ಮೂಲಕ ಆಯಾ ಇಲಾಖಾ ಮುಖ್ಯಸ್ಥರಿಗೆ ಸ್ವಯಂಚಾಲಿತವಾಗಿ ವರದಿ ಕಳುಹಿಸುವಂತೆ ನಿರ್ದೇಶನ ನೀಡಿದ್ದಾರೆ.ಈಗಾಗಲೇ ಶಿಕ್ಷಣ ಇಲಾಖೆಯು ನೂತನ ತಂತ್ರಜ್ಞಾನವುಳ್ಳ ಆ್ಯಪ್ ಆಧರಿತ ಹಾಜರಾತಿ ನಿರ್ವಹಣೆ ಅಳವಡಿಸಿಕೊಂಡಿದೆ. ಇದೀಗ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಿಗೂ ಈ ವ್ಯವಸ್ಥೆಯನ್ನ ವಿಸ್ತರಣೆ ಮಾಡಿದೆ.




