ಉಡುಪಿ : ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ವಾಹನಕ್ಕೆ ಸೈಡ್ ಕೊಡುವ ಸಣ್ಣ ವಿಚಾರಕ್ಕೆ ಆರಂಭವಾದ ತಕರಾರು, ಹೊರ ರಾಜ್ಯದ ಪ್ರವಾಸಿಗರು ಹಾಗೂ ಸ್ಥಳೀಯ ವ್ಯಕ್ತಿಯ ನಡುವೆ ಮಾರಾಮಾರಿಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿವೆ.ಆಂಧ್ರಪ್ರದೇಶ ಹಾಗೂ ಹೈದರಾಬಾದ್ ಮೂಲದ ಪ್ರವಾಸಿಗರು ತಮ್ಮ ಕುಟುಂಬದ ಮಹಿಳೆಯರು ಮತ್ತು ಮಕ್ಕಳೊಂದಿಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ್ದರು. ಮಂಗಳವಾರ ರಾತ್ರಿ ಪಾರ್ಕಿಂಗ್ ಆವರಣದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಎಂಬ ಕಾರು ಚಾಲಕ ಹಾಗೂ ಪ್ರವಾಸಿಗರ ನಡುವೆ ವಾಗ್ವಾದ ಆರಂಭವಾಗಿದೆ. ಈ ವೇಳೆ ಚಾಲಕ ಸುಪ್ರೀತ್ ಪ್ರವಾಸಿಗರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದನ್ನು ಪ್ರವಾಸಿಗರು ಆಕ್ಷೇಪಿಸಿದಾಗ ಜಗಳ ವಿಕೋಪಕ್ಕೆ ತಿರುಗಿದ್ದು, ಸುಪ್ರೀತ್ ತನ್ನ ಕಾರಿನಲ್ಲಿದ್ದ ಕೋಲನ್ನು ತೆಗೆದು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಲ್ಲೆಯ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನೆಯಲ್ಲಿ ಹೈದರಾಬಾದ್ ಮೂಲದ ಪವನ್ ಎಂಬ ಪ್ರವಾಸಿಗ ಗಾಯಗೊಂಡಿದ್ದು, ಸುಪ್ರೀತ್ ವಿರುದ್ಧ ಉಡುಪಿ ನಗರ ಠಾಣೆಗೆ ದೂರು ನೀಡಿದ್ದಾರೆ.ಈ ದೂರಿಗೆ ಪ್ರತಿಯಾಗಿ ಸ್ಥಳೀಯ ಕಾರು ಚಾಲಕ ಸುಪ್ರೀತ್ ಕೂಡ ಪ್ರವಾಸಿಗರ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. “ನಾನು ನನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬರುತ್ತಿದ್ದಾಗ ಪ್ರವಾಸಿಗರು ಗಲಾಟೆ ಆರಂಭಿಸಿದರು. ನಿಧಾನವಾಗಿ ಕಾರು ಚಲಾಯಿಸುವಂತೆ ಹೇಳಿದ್ದಕ್ಕೆ ನನ್ನ ಕಾರಿನ ಗ್ಲಾಸ್ ಜಖಂಗೊಳಿಸಿದ್ದಾರೆ. ಅಷ್ಟೇ ಅಲ್ಲದೆ, ನನ್ನ ಮೇಲೆ ಕುರ್ಚಿ ಹಾಗೂ ಫೋಟೋ ಸ್ಟ್ಯಾಂಡ್ನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಪರಿಣಾಮ ನನ್ನ ಬಾಯಿಯಿಂದ ತೀವ್ರ ರಕ್ತಸ್ರಾವವಾಗಿದೆ” ಎಂದು ಸುಪ್ರೀತ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಮಂಗಳವಾರ ರಾತ್ರಿ ಪಾರ್ಕಿಂಗ್ ಆವರಣದಲ್ಲಿ ಇತ್ತಂಡಗಳ ನಡುವೆ ತೀವ್ರ ವಾಗ್ವಾದ ಹಾಗೂ ಹೊಡೆದಾಟ ನಡೆಯುತ್ತಿರುವುದನ್ನು ಗಮನಿಸಿದ ಮಠದ ಸಿಬ್ಬಂದಿ ಹಾಗೂ ಸ್ಥಳೀಯ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆಯನ್ನು ಶಾಂತಗೊಳಿಸಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.




