ಕೊರಟಗೆರೆ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹಾಗೂ ಹಠಾತ್ ಎದೆನೋವಿನಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೊರಟಗೆರೆಯಲ್ಲಿ ಕರ್ತವ್ಯದ ಮೇಲಿದ್ದ ಕೆಎಸ್ಆರ್ಪಿ (KSRP) ಬೆಟಾಲಿಯನ್ನ ಸಹಾಯಕ ಉಪನಿರೀಕ್ಷಕರೊಬ್ಬರು (ASI) ತೀವ್ರ ಎದೆನೋವಿನಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಎಎಸ್ಐ ಎನ್.ಜಿ. ಪವಾರ್ (54) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನವರಾಗಿದ್ದಾರೆ.ಕೊರಟಗೆರೆಯಲ್ಲಿ ನಿಯೋಜನೆಗೊಂಡಿದ್ದ ಪವಾರ್ ಅವರು, ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಕೆಎಸ್ಆರ್ಪಿ ಬೆಟಾಲಿಯನ್ನ ಸಿಬ್ಬಂದಿ ಬ್ಯಾರಕ್ನಲ್ಲಿ ವಿಶ್ರಾಂತಿಗೆ ತೆರಳಿದ್ದರು. ಈ ವೇಳೆ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಸಹೋದ್ಯೋಗಿ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸಾಗಿಸಲು ಜಿಪ್ಸಿ ವಾಹನದ ಮೂಲಕ ಧಾವಿಸಿದ್ದಾರೆ. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಸಿಗುವ ಮುನ್ನವೇ ಮಾರ್ಗಮಧ್ಯದಲ್ಲಿ ಪವಾರ್ ಅವರು ಕೊನೆಯುಸಿರೆಳೆದಿದ್ದಾರೆ.ಮೃತ ಎನ್.ಜಿ. ಪವಾರ್ ಅವರ ಪತ್ನಿ ಬಾಗಲಕೋಟೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆಗಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.




