ಯುವತಿಗೆ ಮದುವೆಯ ಸುಳ್ಳು ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಯುವಕನ ಪೋಷಕರು ಮತ್ತು ಸಹೋದರಿಯನ್ನು ವಿಚಾರಣೆಗೆ ಒಳಪಡಿಸುವುದು ಕಾನೂನಿನ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಿದೆ.
ಯುವಕನೊಬ್ಬ ಯುವತಿಯೊಂದಿಗೆ ಪ್ರೇಮ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿ ನಂಬಿಕೆ ದ್ರೋಹ ಎಸಗಿದ್ದನೆಂಬ ಆರೋಪ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಯುವಕನ ತಂದೆ, ತಾಯಿ ಹಾಗೂ ಸಹೋದರಿಯನ್ನೂ ಆರೋಪಿಗಳನ್ನಾಗಿ ಸೇರಿಸಿ ದೂರು ನೀಡಲಾಗಿತ್ತು. ತಮ್ಮ ಮೇಲಿನ ಎಫ್ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಈ ಆದೇಶ ನೀಡಿದೆ.
ಮಗ ಹಾಗೂ ದೂರುದಾರೆ ಯುವತಿಯ ನಡುವಿನ ವೈಯಕ್ತಿಕ ಸಂಬಂಧ ಮತ್ತು ನೀಡಲಾದ ಭರವಸೆಗಳಿಗೆ ಪೋಷಕರು ಅಥವಾ ಸಹೋದರಿಯನ್ನು ಅಪರಾಧಕ್ಕೆ ಹೊಣೆಗಾರರನ್ನಾಗಿ ಮಾಡಲು ಬರುವುದಿಲ್ಲ. ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 69ರ ಅಡಿಯಲ್ಲಿ ಬರುವ ಮದುವೆ ಭರವಸೆಯ ವಂಚನೆಯ ಅಪರಾಧವು ಕೇವಲ ಆ ಕೃತ್ಯ ಎಸಗಿದ ಯುವಕನಿಗೆ ಮಾತ್ರ ಅನ್ವಯಿಸುತ್ತದೆ. ಉಳಿದಂತೆ ಜೀವ ಬೆದರಿಕೆ ಹಾಗೂ ಅವಮಾನಿಸಿದ ಆರೋಪಗಳಿಗೂ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ, ಕುಟುಂಬದವರ ವಿರುದ್ಧದ ತನಿಖೆಯನ್ನು ಮುಂದುವರಿಸುವುದು ಸೂಕ್ತವಲ್ಲ ಎಂದು ಪೀಠ ತಿಳಿಸಿದೆ.
ಆದಾಗ್ಯೂ, ಪ್ರಕರಣದ ಮೊದಲನೇ ಆರೋಪಿಯಾಗಿರುವ ಯುವಕನ ವಿರುದ್ಧದ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆಯನ್ನು ಕಾಯ್ದಿರಿಸಲಾಗಿದ್ದು, ಆತನ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ.




