ಮಂಗಳೂರು: ಕೊಲೆ ಯತ್ನ ಪ್ರಕರಣ ಸಂಬಂಧ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ವಿಲೇಜ್ ವಾಸ್ತವ್ಯವಿದ್ದ ಚುಂಕಿ ಆಕಾಶಭವನ ಯಾನೆ ಸಂತೋಷ್ ಎಸ್. (34) ಎಂದು ತಿಳಿದು ಬಂದಿದೆ.
2015ರಲ್ಲಿ ಮಂಗಳೂರು ನಗರದ ಆಕಾಶಭವನದಲ್ಲಿ ನಡೆದ ಮದುವೆಯ ಮದುರಂಗಿ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾರ್ ಕೊಟ್ಟಾರಿ ಹಾಗೂ ಆರೋಪಿ ಜಗ್ಗು ಎಂಬವರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಈ ಸಂದರ್ಭ ಚುಂಕಿ ಆಕಾಶಭವನ ಇತರ ಆರೋಪಿಗಳಾದ ರಂಜಿತ್, ಧನು, ಧೂಮ, ಸ್ವೀಟಿ ಯಾನೆ ನರೇಶ್ ಮತ್ತು ಜಗ್ಗು ಜೊತೆ ಸೇರಿಕೊಂಡು ಅಶೋಕ ಕುಮಾರ್ ಕೊಟ್ಟಾರಿ ಮೇಲೆ ತಲವಾರಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿದ್ದರು.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 135/2015 ರಂತೆ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಚುಂಕಿ ಆಕಾಶಭವನ ಪ್ರಕರಣ ದಾಖಲಾದ ದಿನದಿಂದ ತಲೆಮರೆಸಿಕೊಂಡಿದ್ದನು. ನ್ಯಾಯಾಲಯವು ಆತನ ವಿರುದ್ಧ 25/2025 ರಂತೆ ಎಲ್ಪಿಸಿ (LPC) ವಾರಂಟ್ ಹೊರಡಿಸಿತ್ತು ಎಂದು ತಿಳಿದು ಬಂದಿದೆ.
ಯಾವುದೇ ಸುಳಿವು ಇಲ್ಲದ ಈತನ ಕುರಿತು ಬಹಳ ಸಮಯದಿಂದ ಮಾಹಿತಿ ಸಂಗ್ರಹಿಸುತ್ತಿದ್ದ ಸಿಸಿಬಿ ಪೊಲೀಸರಿಗೆ ಈತನು ಶಿವಮೊಗ್ಗದಲ್ಲಿ ಇದ್ದಾನೆಂದು ಖಚಿತ ಮಾಹಿತಿ ಲಭಿಸಿತ್ತು.
ಈ ಹಿನ್ನೆಲೆಯಲ್ಲಿ ಜು.29ರಂದು ಈತನನ್ನು ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.




