ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೊ (48) ಅವರ ಮೃತದೇಹ ಸೋಮವಾರ ಬೆಳಗ್ಗೆ ಅರಳ ಗ್ರಾಮದ ಪಂಬದಗಡ್ಡೆ ಪ್ರದೇಶದಲ್ಲಿ ಪತ್ತೆಯಾಗಿದೆ.
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೊ ಅವರ ಪುತ್ರ ಜೀವನ್ ಪಿಂಟೊ ಅವರು ಶನಿವಾರ ರಾತ್ರಿ ನಾಪತ್ತೆಯಾಗಿದ್ದರು. ಘಟನಾ ಸ್ಥಳದ ಸಮೀಪ ತುಂಬಿ ಹರಿಯುತ್ತಿದ್ದ ಹಳ್ಳದ ಬಳಿ ಅವರ ಚಪ್ಪಲಿ ಹಾಗೂ ಟಾರ್ಚ್ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ಅವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿತ್ತು. ಘಟನೆಯ ಮಾಹಿತಿ ದೊರಕಿದ ತಕ್ಷಣ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ತಂಡಗಳು ರಾತ್ರಿ ವೇಳೆಯಿಂದಲೇ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದವು. ಭಾರಿ ಮಳೆ ಹಾಗೂ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾದರೂ ಶೋಧ ಮುಂದುವರಿಸಲಾಗಿತ್ತು. ಸೋಮವಾರ ಬೆಳಗ್ಗೆ ಅರಳ ಗ್ರಾಮದ ಪಂಬದಗಡ್ಡೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೊ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್ಡಿಆರ್ಎಫ್ ತಂಡ ಮಾಹಿತಿ ನೀಡಿದೆ. ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಪ್ರಕ್ರಿಯೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.




