ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ನಡೆದ ಡೇವಿಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೂಲದ ಸೂರಜ್ ಬಂಧಿತ ಆರೋಪಿ. ಪ್ರಕರಣದ ಆರೋಪಿಗಳಾದ ಚಿರಾಗ್ ಹಾಗೂ ಇರ್ಷಾದ್, ಹತ್ಯೆಗೆ ಸಂಬಂಧಿಸಿದ ಶೂಟರ್ ರಾಜುವಿಗೆ ನೀಡಬೇಕಿದ್ದ ಹಣವನ್ನು ಸೂರಜ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು ಎನ್ನಲಾಗಿದೆ.
ಆರೋಪಿಗಳ ಬ್ಯಾಂಕ್ ಖಾತೆಗಳ ವಹಿವಾಟು ಹಾಗೂ ಮೊಬೈಲ್ ಕರೆಗಳ ವಿವರಗಳನ್ನು ಪರಿಶೀಲಿಸಿದ ವೇಳೆ ಸೂರಜ್ಗೆ ಸಂಬಂಧಿಸಿದ ಮಹತ್ವದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಮಾಹಿತಿಯ ಆಧಾರದ ಮೇಲೆ ತನಿಖಾ ತಂಡವು ಬಾಂಬೆ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಿ ಕಾರ್ಯಾಚರಣೆ ನಡೆಸಿ ಸೂರಜ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತ ಸೂರಜ್ನನ್ನು ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ನ್ಯಾಯಾಧೀಶ ಎಂ. ಪುರುಷೋತ್ತಮ್ ಅವರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.




