ಉಡುಪಿಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಗಾಂಧಿ ನಗರ ನಿವಾಸಿ ಶಾಹಿದ್ ಅಲಿ( 31) ಬಂಧಿತ ಆರೋಪಿ. ಆ.23ರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಬ್ರಹ್ಮಾವರ ಗಾಂಧಿನಗರ ನಿವಾಸಿಗಳಾದ ಮೆಹೆಬೂಬ್ ಹಾಗೂ ಅವರ ಪತ್ನಿ ಸಂಶದ್ ಬೇಗಂ ಅವರನ್ನು ಆರೋಪಿ ಶಾಹಿದ್ ಅಲಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ತಂದೆ-ತಾಯಿ ತನಗೆ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರು. ಇದೇ ಕಾರಣಕ್ಕೆ ಅವರನ್ನು ಕೊಲೆ ಮಾಡಿರುವುದಾಗಿ ಆರೋಪಿ ಶಾಹಿದ್ ಅಲಿ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಆ.24ರ ಬೆಳಗ್ಗೆ ಸುಮಾರು 9 ಗಂಟೆಗೆ ಆರೋಪಿ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ತನ್ನ ತಂದೆ-ತಾಯಿಯನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಮಾಹಿತಿ ಪಡೆದ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಹಿಂದಿರುವ ಇತರ ವಿಚಾರಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




