ಕಾಸರಗೋಡು: ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದೆ. ಹೊಸಂಗಡಿಯ ನರಸಿಂಹಮೂರ್ತಿ ಅವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ರಮೇಶ್ ಅವರ ಮೃತದೇಹ ಪತ್ತೆಯಾಗಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು.
ಮದ್ಯಪಾನದ ವೇಳೆ ನಡೆದ ಜಗಳವೇ ಸಾವಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಪೊಲೀಸರು ಇದನ್ನು ಕೊಲೆ ಪ್ರಕರಣವೆಂದು ಶಂಕಿಸಿದ್ದಾರೆ.
ದಿನ ಕೂಲಿ ಕೆಲಸ ಮುಗಿಸಿ ಕ್ವಾರ್ಟರ್ಸ್ಗೆ ಹಿಂದಿರುಗಿದ ಇತರ ಕಾರ್ಮಿಕರು ರಮೇಶ್ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಮೇಶ್ ಅವರು ಆ ಕ್ವಾರ್ಟರ್ಸ್ನಲ್ಲಿ ಶಾಶ್ವತವಾಗಿ ವಾಸಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳದಿಂದ ಇಬ್ಬರು ವ್ಯಕ್ತಿಗಳು ಪರಾರಿಯಾಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಮಂಜೇಶ್ವರ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಮರಣೋತ್ತರ ಪರೀಕ್ಷೆ ಹಾಗೂ ಪ್ರಕರಣದ ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.




