ಮಂಗಳೂರು: 17 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆ. ಅಬ್ದುಲ್ ಬಶೀರ್ @ ಅರ್ಗ ಬಶೀರ್(50) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುಮಾರು 17 ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯವು ಈತನ ವಿರುದ್ಧ ದಸ್ತಗಿರಿ ಮತ್ತು ಉದ್ಗೋಷಣ ವಾರಂಟ್ ಹೊರಡಿಸಿದ್ದರೂ, ಆತನು ತನ್ನ ಮೂಲ ನಿವಾಸ ತೊರೆದು ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ನ ಪರ್ಲಿಯಾ ಎಂಬಲ್ಲಿ ಬಾಡಿಗೆ ಮನೆಯಲ್ಲಿ ತಲೆಮರೆಸಿಕೊಂಡಿದ್ದನು.
ಮಾಹಿತಿದಾರರ ಖಚಿತ ಮಾಹಿತಿಯ ಆಧಾರದಲ್ಲಿ, ದಿನಾಂಕ ಎಪ್ರಿಲ್ 18 ರಂದು ಸಂಜೆ 7:30ರ ಸುಮಾರಿಗೆ ಪೊಲೀಸರು ದಾಳಿ ನಡೆಸಿ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್, ಪರ್ಲಿಯ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ವಿರುದ್ಧ ಕಳ್ಳತನ, ದರೋಡೆ, ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿದೆ.
ಈ ಕಾರ್ಯಾಚರಣೆಯನ್ನು ಮೇಲಾಧಿಕಾರಿಗಳ ನಿರ್ದೇಶನದಂತೆ ಮೂಡಬಿದ್ರೆ ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದು, ಈತನು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ಕಾರಣ ಈತನ ವಿರುದ್ಧ ಮೂಡಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.




