ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್ಗಳು ಮತ್ತು ಎಲ್ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅನಿಲ್ ಅಂಬಾನ ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮೇ 14) ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿದ್ದಾರೆ.
ಪ್ರಮುಖರ ನಿವಾಸಗಳ ಮೇಲೆ ದಾಳಿ
ರಿಲಯನ್ಸ್ ಕಮ್ಯುನಿಕೇಷನ್ಸ್ನಲ್ಲಿ 2015 ರಿಂದ 2017ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಸಿಇಒ (CEO), ಸಿಎಫ್ಒ (CFO) ಮತ್ತು ನಿರ್ದೇಶಕರ ವಸತಿ ಆವರಣಗಳ ಮೇಲೆ ಈ ದಾಳಿ ನಡೆದಿದೆ. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ನೀಡಿದ ಸರ್ಚ್ ವಾರಂಟ್ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದ್ದು, ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ.
27 ಸಾವಿರ ಕೋಟಿಗೂ ಅಧಿಕ ವಂಚನೆ
ಅನಿಲ್ ಅಂಬಾನಿ ನೇತೃತ್ವದ ಸಮೂಹ ಸಂಸ್ಥೆಗಳ ವಿರುದ್ಧ ಕಳೆದ ಕೆಲವು ತಿಂಗಳುಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ವಿವಿಧ ಬ್ಯಾಂಕ್ಗಳು ಮತ್ತು ಎಲ್ಐಸಿ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಒಟ್ಟು ವಂಚನೆಯ ಮೊತ್ತ ಬರೋಬ್ಬರಿ 27,337 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಈ ಹಗರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನೇರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.
ಈಗಾಗಲೇ ಇಬ್ಬರ ಬಂಧನ
ಈ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ 20ರಂದು ರಿಲಯನ್ಸ್ ಕಮ್ಯುನಿಕೇಷನ್ಸ್ನ ಜಂಟಿ ಅಧ್ಯಕ್ಷ ಡಿ. ವಿಶ್ವನಾಥ್ ಮತ್ತು ಉಪಾಧ್ಯಕ್ಷ ಅನಿಲ್ ಕಲ್ಯಾ ಅವರನ್ನು ಸಿಬಿಐ ಬಂಧಿಸಿತ್ತು. ಬ್ಯಾಂಕಿಂಗ್ ಕಾರ್ಯಾಚರಣೆ ಮತ್ತು ಹಣದ ದುರುಪಯೋಗದಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು ಎಂಬ ಆರೋಪವಿದ್ದು, ಪ್ರಸ್ತುತ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಸಿಬಿಐ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಒಟ್ಟು 31 ಸ್ಥಳಗಳಲ್ಲಿ ತಪಾಸಣೆ ನಡೆಸಿದೆ.




