ಬೆಂಗಳೂರು: ಸೈಬರ್ ಅಪರಾಧ ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕೋರಮಂಗಲದ ಪರೇಡ್ ಮೈದಾನದಲ್ಲಿ ಗುರುವಾರ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ 158 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕ ಪ್ರಧಾನ ಮಾಡಿ ಮಾತನಾಡಿದ ಅವರು, ಸೈಬರ್ ಕ್ರೈಂ ಹಾಗೂ ಮಾದಕ ದ್ರವ್ಯಗಳ ಅಪರಾಧಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಇದೆ.
ಈ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಕೆಲಸ ಆಗಬೇಕು. ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸರು ಪ್ರಯತ್ನ ಮಾಡದಿದ್ದರೆ, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ನಾನು ಹಲವು ಸಂದರ್ಭಗಳಲ್ಲಿ ಹೇಳಿದ್ದೇನೆ ಮತ್ತು ಈಗಲೂ ಪುನರುಚ್ಚರಿಸುತ್ತಿದ್ದೇನೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರ ಗಮನಕ್ಕೆ ಬಾರದೆ ಯಾವುದೇ ಕ್ರಿಮಿನಲ್ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಇದನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಪೊಲೀಸ್ ಇನ್ಸ್ಪೆಕ್ಟರ್ಗಳು ತಮ್ಮ ಮಿತಿಯಲ್ಲಿ ದಕ್ಷತೆಯಿಂದ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಹಲವಾರು ಅಪರಾಧ ಚಟುವಟಿಕೆಯನ್ನು ತಡೆಯಬಹುದು ಎಂದು ಸಿಎಂ ಹೇಳಿದರು




