ಮಂಗಳೂರು : ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿಗಳ ಬೆನ್ನು ಬಿದ್ದಿರುವ ಪೊಲೀಸರು ಸದ್ರಿ ಆರೋಪಿಗಳಿಗೆ ಜಾಮೀನು ನೀಡಿದ್ದ ಶ್ಯೂರಿಟಿದಾರರು ಮತ್ತು ಶ್ಯೂರಿಟಿಗಾಗಿ ನೀಡಿರುವ ಜಮೀನನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಂಡಿದ್ದಾರೆ.
‘ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ತನಿಖೆಯನ್ನು ಪೂರೈಸಿ, ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ನಂತರ ಕೆಲವು ಪ್ರಕರಣಗಳಲ್ಲಿ ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾರೆ. ಸದ್ರಿ ಆರೋಪಿಗಳು ತಲೆಮರೆಸಿಕೊಂಡ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಆರೋಪಿಗಳ ಬಿಡುಗಡೆ ಸಮಯದಲ್ಲಿ ಶ್ಯೂರಿಟಿದಾರರು ಭದ್ರತೆಯ ಆಧಾರವಾಗಿ ನೀಡಿದ ಜಮೀನು/ಸೊತ್ತು ವಿವರಗಳನ್ನು ಸಂಗ್ರಹಿಸಲಾಗಿದೆ.
ನ್ಯಾಯಾಲಯದಿಂದ ಆದೇಶವನ್ನು ಪಡೆದು ಶ್ಯೂರಿಟಿದಾರರಿಗೆ ಸಂಬಂಧಿಸಿದ ಸೊತ್ತುಗಳನ್ನು ಮುಟ್ಟುಗೋಲು ಹಾಕಲು ಮತ್ತು ಅದಕ್ಕೆ ಆಧಾರವಾಗಿಟ್ಟಿದ್ದ ದಂಡವನ್ನು ವಸೂಲಿ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಬಗ್ಗೆ ಮುಟ್ಟುಗೋಲು ಮಾಡಿರುವ ಆಸ್ತಿಯ ಆರ್.ಟಿ.ಸಿ. ಪತ್ರದಲ್ಲಿ ವಿವರಗಳನ್ನು ನಮೂದಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಮುಟ್ಟುಗೋಲು ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.
ಕಳೆದ ಒಂದು ತಿಂಗಳಿನಿಂದ ಇಂತಹ 5 ಅಪರಾಧ ಪ್ರಕರಣಗಳಲ್ಲಿ ಶ್ಯೂರಿಟಿಗಾಗಿ ಇರಿಸಲಾಗಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಿದ್ದು, ಎರಡು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ದಂಡ ವಿಧಿಸಲಾಗಿದೆ. 4 ಪ್ರಕರಣಗಳಲ್ಲಿ ಮುಟ್ಟುಗೋಲು ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ರೀತಿಯ ಕಾರ್ಯಾಚರಣೆ ಆರಂಭವಾದ ಬಳಿಕ ಎರಡು ಪ್ರಕರಣಗಳಲ್ಲಿ ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಸದರಿ ಕಾರ್ಯಾಚರಣೆ ಮುಂದುವರಿದಿದ್ದು, ಸಾರ್ವಜನಿಕರು ಆರೋಪಿಗಳ ಪರ ಜಾಮೀನು ಕೊಡುವಾಗ ಆತನ ಪೂರ್ವಾಪರ ತಿಳಿದುಕೊಂಡು ಎಚ್ಚರ ವಹಿಸಬೇಕಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




