ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ನಡೆದ ಬಗ್ಗೆ ವರದಿಯಾಗಿದ್ದು, ಹನಿಟ್ರ್ಯಾಪ್ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧೀ ಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26), ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಒಟ್ಟು 18 ಲಕ್ಷ ರೂ. ಮೌಲ್ಯದ ಎರಡು ಕಾರುಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಆರೋಪಿಗಳನ್ನು ಕೋಟೇಶ್ವರ ಗ್ರಾಮದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ; ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಈ ಪ್ರಕರಣದಲ್ಲಿ ದೂರುದಾರರಿಗೆ ಮೂರು ತಿಂಗಳ ಹಿಂದೆ ಕುಂದಾಪುರಕ್ಕೆ ಬಂದಾಗ ಆರೋಪಿ ಸವಾದ್ನ ಪರಿಚಯವಾಗಿದ್ದು, ಬಳಿಕ ಆತನ ಸ್ನೇಹಿತರಾದ ಉಳಿದ ಆರೋಪಿಗಳ ಪರಿಚಯವಾಗಿದೆ. ಇದೇ ವೇಳೆ ಸವಾದ್, ಆಸ್ಮಾ ಎಂಬಾಕೆಯನ್ನು ಪರಿಚಯ ಮಾಡಿಕೊಟ್ಟು ಮೊಬೈಲ್ ನಂಬರ್ ಕೊಟ್ಟಿದ್ದನು. ಆಕೆಯ ಜತೆ ಸಂಪರ್ಕ ಸಾಧಿಸಿದ ದೂರುದಾರ ಬಳಿಕ ಆಕೆಯ ಜತೆ ಲೈಂಗಿಕ ಸಂಪರ್ಕ ಮಾಡಬಹುದು ಎಂದು ತಿಳಿದು ಆಕೆಗೆ ಕರೆ ಮಾಡಿದ್ದಾನೆ. ಅದರಂತೆ ಆಕೆ ದೂರುದಾರನನ್ನು ಕುಂದಾಪುರಕ್ಕೆ ಸಪ್ಟೆಂಬರ್ 2 ರಂದು ಬರಮಾಡಿಸಿದ್ದಳು. ಬಳಿಕ ಆರೋಪಿಗಳೆಲ್ಲರೂ ಸೇರಿ ದೂರುದಾರನನ್ನು ಬೆದರಿಸಿ ಹಲ್ಲೆಗೈದು ಆತನ ಬಳಿ ಇದ್ದ ನಗದು ಹಾಗೂ ಎಟಿಎಂ ಕಾರ್ಡ್ ಬಲವಂತವಾಗಿ ಕಿತ್ತುಕೊಂಡು ಅದರ ಮೂಲಕವೂ ಹಣ ಡ್ರಾ ಮಾಡಿ ಒಟ್ಟು 81,200 ರೂಪಾಯಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.




