ಬೆಂಗಳೂರು : ‘ಕಾಂತಾರ ಚಾಪ್ಟರ್-1’ ಚಿತ್ರದ ದೈವದ ಪಾತ್ರವನ್ನು ಅಣಕಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ವಿಶಿಷ್ಟ ಷರತ್ತಿನೊಂದಿಗೆ ರಿಲೀಫ್ ನೀಡಿದೆ. ರಣವೀರ್ ಸಲ್ಲಿಸಿದ ಬೇಷರತ್ ಕ್ಷಮಾಪಣೆಯನ್ನು ಅಂಗೀಕರಿಸಿದ ನ್ಯಾಯಾಲಯ, ಒಂದು ತಿಂಗಳೊಳಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವಂತೆ ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿದೆ.
2025ರ ನವೆಂಬರ್ನಲ್ಲಿ ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರದ ಬಗ್ಗೆ ಮಾತನಾಡುವಾಗ ದೈವದ ನರ್ತನ ಮತ್ತು ಕೂಗನ್ನು ಅಪಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ವಕೀಲ ಪ್ರಶಾಂತ್ ಮೆಥಲ್ ಅವರು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನು ರದ್ದುಪಡಿಸುವಂತೆ ಕೋರಿ ರಣವೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ವಿಚಾರಣೆ ವೇಳೆ ರಣವೀರ್ ಪರ ಹಿರಿಯ ವಕೀಲ ಸಜನ್ ಪೂವಯ್ಯ ಅವರು ನಟನ ಪ್ರಮಾಣ ಪತ್ರವನ್ನು ಸಲ್ಲಿಸಿದರು. “ನಾನು ಮುಂಬೈನ ಸಿಂಧಿ ಕುಟುಂಬದವನಾಗಿದ್ದು, ದೈವದ ಆಚರಣೆಯ ಸೂಕ್ಷ್ಮತೆಗಳ ಬಗ್ಗೆ ನನಗೆ ಅರಿವಿರಲಿಲ್ಲ. ಭಕ್ತರ ಭಾವನೆಗೆ ನೋವಾಗಿದ್ದರೆ ಪ್ರಾಮಾಣಿಕವಾಗಿ ಬೇಷರತ್ ಕ್ಷಮೆ ಯಾಚಿಸುತ್ತೇನೆ” ಎಂದು ರಣವೀರ್ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.
“ರಣವೀರ್ ಅವರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಭೇಟಿ ನೀಡಲು ಸಿದ್ಧರಿದ್ದಾರೆ. ಆದರೆ, ಜನದಟ್ಟಣೆಯ ನಡುವೆ ಸುರಕ್ಷತೆಯ ದೃಷ್ಟಿಯಿಂದ ದಿನಾಂಕ ನಿಗದಿಪಡಿಸುವುದು ವಿಳಂಬವಾಗುತ್ತಿದೆ” ಎಂದು ರಣವೀರ್ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ದೂರುದಾರರು, “ಕರ್ನಾಟಕ ಪೊಲೀಸರು ಸಬಲರಾಗಿದ್ದಾರೆ, ಅವರು ಸೂಕ್ತ ಭದ್ರತೆ ನೀಡಲಿದ್ದಾರೆ” ಎಂದು ವಾದಿಸಿದರು. ಅಂತಿಮವಾಗಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಮುಂದಿನ ಒಂದು ತಿಂಗಳ ಒಳಗಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವಂತೆ ಸೂಚಿಸಿ ಪ್ರಕರಣವನ್ನು ಅಂತ್ಯಗೊಳಿಸಿತು.




