ಮಂಗಳೂರು: ದ.ಕ.ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬನಿಗೆ ನೀಡಲು ತಂದಿದ್ದ ಎಂಡಿಎಂಎ ಮಾದರಿ ಪುಡಿ ಸಹಿತ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಬರ್ಕೆ ಠಾಣೆಯ ಪೊಲೀಸರಿಗೊಪ್ಪಿಸಿದ್ದಾರೆ.
ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ನೀಡಿದ ದೂರಿನಂತೆ ಆರೋಪಿ ಉರ್ವಸ್ಟೋರ್ ನಿವಾಸಿ ಆಶಿಕ್ ಎಂಬಾತನನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಚಾರಣಾಧೀನ ಕೈದಿ ಅನ್ವಿತ್ ಎಂಬಾತನನ್ನು ಭೇಟಿ ಮಾಡಲು ಸೋಮವಾರ ಮಧ್ಯಾಹ್ನ ಕಾರಾಗೃಹಕ್ಕೆ ಆಶಿಕ್ ಬಂದಿದ್ದ. ಕೈದಿಗೆ ನೀಡಲು ತಂದಿದ್ದ ಸಾಮಗ್ರಿಗಳನ್ನು ಪರಿಶೀಲನೆ ನಡೆಸಿದಾಗ ಟೂತ್ಪೇಸ್ಟ್ ಒಳಭಾಗದಲ್ಲಿ ಅನುಮಾನಾಸ್ಪದ ವಸ್ತುಗಳು ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಹಾಯಕ ಕಮಾಂಡೆಂಟ್ ಅದನ್ನು ಪರಿಶೀಲಿಸಿದಾಗ ಎಂಡಿಎಂಎನಂತೆ ಕಾಣುವ ಬಿಳಿ ಬಣ್ಣದ ಹರಳಿನಂತಿರುವ ಅನುಮಾನಾಸ್ಪದ ಪುಡಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಆಶಿಕ್ ಬಳಿ ವಿಚಾರಿಸಿದಾಗ ಕಾರಾಗೃಹದ ಮುಂಭಾಗದ ಜೆರಾಕ್ಸ್ ಅಂಗಡಿ ಬಳಿ ವ್ಯಕ್ತಿಯೊಬ್ಬ ಕೆಲವು ಬೇಕರಿ ತಿಂಡಿಗಳನ್ನು ನೀಡಲಿದ್ದು, ಅದನ್ನು ಅನ್ವಿತ್ಗೆ ನೀಡುವಂತೆ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಸಚಿನ್ ತಲಪಾಡಿ ಎಂಬಾತನ ಸೂಚನೆಯಂತೆ ತಂದಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




