ಕಾಸರಗೋಡು: ಹಾಡುಹಗಲೇ ಮಹಿಳೆಯೊಬ್ಬರಿಗೆ ಅಡ್ಡಗಟ್ಟಿ, ಅವರ ಕುತ್ತಿಗೆಯಲ್ಲಿದ್ದ ಎರಡು ಪವನ್ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಬಂಧಿತ ಆರೋಪಿಯನ್ನು ಕುಂಬ್ಳೆಯ ಬಂಬ್ರಾಣ ನಿವಾಸಿ ಎ. ಸಂದೀಪ್ (31) ಎಂದು ಗುರುತಿಸಲಾಗಿದೆ. ಈ ಘಟನೆಯು ಸೋಮವಾರ ಸಂಜೆ ಹೊಸಂಗಡಿ ಸಮೀಪ ನಡೆದಿತ್ತು.
ಘಟನೆಯ ವಿವರ:
ಪೈವಳಿಕೆಯ ಬಾಯಿಕಟ್ಟೆ ನಿವಾಸಿ ನಯನಾ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ, ಸ್ಕೂಟರ್ನಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ದಾರಿ ಕೇಳುವ ನೆಪದಲ್ಲಿ ಅವರ ಬಳಿ ಬಂದಿದ್ದಾರೆ. ಮಾತನಾಡುವ ನೆಪದಲ್ಲಿ ನಯನಾ ಅವರ ಕುತ್ತಿಗೆಯಲ್ಲಿದ್ದ ಎರಡು ಪವನ್ ಚಿನ್ನದ ಸರವನ್ನು ಕಿತ್ತುಕೊಂಡು ಆರೋಪಿಗಳು ಸ್ಕೂಟರ್ನಲ್ಲಿ ಸ್ಥಳದಿಂದ ಪರಾರಿಯಾಗಿದ್ದರು.
ನಯನಾ ಅವರು ನೀಡಿದ ದೂರಿನ ಮೇರೆಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಲ್ಲಿ ಓರ್ವನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.




