ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಕರಾವಳಿ ಪ್ರವಾಸೋದ್ಯಮದ ರಾಯಭಾರಿಯನ್ನಾಗಿ (ಬ್ರಾಂಡ್ ಅಂಬಾಸಿಡರ್) ನೇಮಕ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇದರ ಬೆನ್ನಲ್ಲೇ ಕರಾವಳಿಯ ಪ್ರಗತಿಪರ ವಲಯ ಮತ್ತು ರಾಜಕೀಯ ಪಕ್ಷಗಳ ನಡುವೆ ಪರ-ವಿರೋಧದ ತೀವ್ರ ಚರ್ಚೆಗಳು ಆರಂಭವಾಗಿವೆ.ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ನಟ ರಿಷಬ್ ಶೆಟ್ಟಿ ಕೂಡ ಭಾಗವಹಿಸಿದ್ದರು. ಕರಾವಳಿ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವುದು, ಚಿತ್ರೀಕರಣಕ್ಕೆ ಹೆಚ್ಚಿನ ಸೌಲಭ್ಯ ನೀಡುವುದು ಹಾಗೂ ಉದ್ಯೋಗ ಸೃಷ್ಟಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ರಿಷಬ್ ಶೆಟ್ಟಿ ಅವರನ್ನು ರಾಯಭಾರಿಯನ್ನಾಗಿ ಮಾಡುವ ಸರ್ಕಾರದ ತೀರ್ಮಾನಕ್ಕೆ ಕರಾವಳಿ ಭಾಗದ ಪ್ರಗತಿಪರರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಬಲಪಂಥೀಯ ಒಲವು ಹೊಂದಿರುವ ನಟರಾಗಿದ್ದು, ಅವರಿಗೆ ಈ ಜವಾಬ್ದಾರಿ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, “ಉನ್ನತ ಅಧಿಕಾರಿಗಳು ಹಾಗೂ ಸಚಿವರ ಸಭೆಯಲ್ಲಿ ಚಿತ್ರನಟ ರಿಷಬ್ ಶೆಟ್ಟಿ ಮಾತ್ರ ಹಾಜರಿರುವುದು ಹಲವು ಪ್ರಶ್ನೆಗಳನ್ನು ಎತ್ತುತ್ತದೆ. ಮುಖ್ಯಮಂತ್ರಿಗಳು ಅವರಿಗೆ ಮಾತ್ರ ಅಷ್ಟೊಂದು ಆದ್ಯತೆ ನೀಡುತ್ತಿರುವುದಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಶಶಿಧರ್ ಹೆಮ್ಮಾಡಿ ಅವರು, “ರಿಷಬ್ ಶೆಟ್ಟಿಯನ್ನು ಪ್ರವಾಸೋದ್ಯಮದ ರಾಯಭಾರಿಯನ್ನಾಗಿ ಮಾಡಲು ಹೊರಟಿರುವುದು ಕಾಂಗ್ರೆಸ್ ಸರ್ಕಾರದ ಭಾರಿ ಸೈದ್ಧಾಂತಿಕ ದುರಂತ” ಎಂದು ಅಸಮಾಧಾನ ಹೊರಹಾಕಿದ್ದಾರೆ.ಮತ್ತೊಂದೆಡೆ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಬೆಂಬಲಿಸಿದೆ. “ರಿಷಬ್ ಶೆಟ್ಟಿ ಕರಾವಳಿ ಪ್ರವಾಸೋದ್ಯಮದ ರಾಯಭಾರಿಯಾಗಲು ಅತ್ಯಂತ ಸೂಕ್ತ ವ್ಯಕ್ತಿ. ಕರಾವಳಿಯ ಪರಂಪರೆ, ದೈವಾರಾಧನೆ ಮತ್ತು ಸಂಸ್ಕೃತಿಯನ್ನು ತಮ್ಮ ಸಿನಿಮಾಗಳ ಮೂಲಕ ಜಗತ್ತಿನಾದ್ಯಂತ ಪಸರಿಸಿದ ಅವರ ಕೊಡುಗೆ ಅಪಾರ. ಸರ್ಕಾರದ ಈ ಚಿಂತನೆ ಸ್ವಾಗತಾರ್ಹ” ಎಂದಿದ್ದಾರೆ.ಈ ಹಿಂದೆ ರಿಷಬ್ ಶೆಟ್ಟಿ ವಾಹಿನಿಯೊಂದರ ಸಂದರ್ಶನದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಳಿದ ಪ್ರಶ್ನೆಗೆ ನೋ ಕಮೆಂಟ್ಸ್ ಅಂತ ಹೇಳಿದ್ದರು, ಇದೀಗ ಅದೇ ವಿಡಿಯೋವನ್ನು ಬಳಸಿ , ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಪ್ರಾರಂಭವಾಗಿದೆ.




