ಮಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಸಾರ್ವಜನಿಕರಿಗೆ ವಿಶೇಷ ಸಲಹೆ ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕಾರ್ಯಕ್ರಮವು ಸಂಪೂರ್ಣವಾಗಿ ಆಹ್ವಾನಿತರಿಗೆ ಮಾತ್ರ ಮೀಸಲಾಗಿರುವ ಖಾಸಗಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಪೊಲೀಸರು ಬಿಡುಗಡೆ ಮಾಡಿದ ಸಾರ್ವಜನಿಕ ಸಲಹೆಯ ಪ್ರಕಾರ, ಬಾಲಿವುಡ್ ನಟ ಶಾರುಖ್ ಖಾನ್ ಭಾಗವಹಿಸುವ ಕಾರ್ಯಕ್ರಮಕ್ಕೆ ಪ್ರವೇಶ ಪಾಸ್ ಹೊಂದಿರುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಪಾಸ್ ಇಲ್ಲದ ವ್ಯಕ್ತಿಗಳಿಗೆ ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶ ನಿರಾಕರಿಸಲಾಗುವುದು ಎಂದು ತಿಳಿಸಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಪ್ರವೇಶದ್ವಾರಗಳಲ್ಲಿ ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ತೊಂದರೆ ತಪ್ಪಿಸಲು ಸಾರ್ವಜನಿಕರು ನಿಯಮಗಳನ್ನು ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಶಾರುಖ್ ಖಾನ್ ಭೇಟಿ ಹಿನ್ನೆಲೆ ಸಂಚಾರ ದಟ್ಟಣೆ ಉಂಟಾಗದಂತೆ ಪೊಲೀಸರು ವಿಶೇಷ ಸಂಚಾರ ನಿರ್ವಹಣಾ ಕ್ರಮಗಳನ್ನು ಕೈಗೊಂಡಿದ್ದಾರೆ. ಹೆದ್ದಾರಿ ಮತ್ತು ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ವಾಹನ ಸಂಚಾರ ಸುಗಮವಾಗಿರುವಂತೆ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ.
ಸಾರ್ವಜನಿಕರಿಗೆ ಮನವಿ
ಕಾರ್ಯಕ್ರಮದ ಸ್ಥಳದ ಬಳಿ ಗುಂಪುಗೂಡಬೇಡಿ.
ಹೆದ್ದಾರಿ ಅಥವಾ ಪ್ರಮುಖ ರಸ್ತೆಗಳನ್ನ ಬ್ಲಾಕ್ ಮಾಡಬೇಡಿ
ವಾಹನ ಸಂಚಾರಕ್ಕೆ ಅಡ್ಡಿಯಾಗುವ ರೀತಿಯ ಚಟುವಟಿಕೆಗಳಿಂದ ದೂರವಿರಿ.
ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ.
ನಗರದ ಸಂಚಾರ ವ್ಯವಸ್ಥೆ ಸುಗಮವಾಗಿರಲು ಸಾರ್ವಜನಿಕರು ಸಹಕರಿಸುವಂತೆ ಮಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ. ತುರ್ತು ಸಹಾಯಕ್ಕಾಗಿ 112 ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ.




