ಬಂಟ್ವಾಳ: ರಾತ್ರಿ ನಿಗದಿತ ಸಮಯದ ನಂತರವೂ ಧ್ವನಿವರ್ಧಕಗಳನ್ನು ಬಳಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ, ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಪುಂಜಾಲಕಟ್ಟೆ, ಅವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 27, 2025 ರಂದು ರಾತ್ರಿ 10.45 ರ ಸುಮಾರಿಗೆ ಬಂಗ್ಲೆ ಮೈದಾನದಲ್ಲಿ ಧ್ವನಿವರ್ಧಕಗಳನ್ನು ಬಳಸಿಕೊಂಡು ಕಾರ್ಯಕ್ರಮ ನಡೆಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್ಐ ಅವರು ಸ್ಥಳಕ್ಕೆ ಭೇಟಿ ನೀಡಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳಿಗೆ ಧ್ವನಿವರ್ಧಕಗಳ ಬಳಕೆಯ ಕಾನೂನು ನಿಯಮಗಳ ಬಗ್ಗೆ ಮಾಹಿತಿ ನೀಡಿ, ತಕ್ಷಣವೇ ಅವುಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಸಂಘಟಕರು ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸಿದ್ದಾರೆ.
ಆದರೆ, ರಾತ್ರಿ 11.50 ರ ಸುಮಾರಿಗೆ ಪೊಲೀಸರು ಮತ್ತೊಮ್ಮೆ ಸ್ಥಳಕ್ಕೆ ಬಂದಾಗ, ಅವರ ನಿರ್ದೇಶನವನ್ನು ಉಲ್ಲಂಘಿಸಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರು ಪ್ರಶ್ನಿಸಿದಾಗ, ಸಮಿತಿಯ ಅಧ್ಯಕ್ಷ ಕೌಶಿಕ್ ಶೆಟ್ಟಿ, ಪುನೀತ್ ಮಡಂತ್ಯಾರು, ತಾರನಾಥ ಕಜೆಕ್ಕಾರು, ಗುರು ಮಡಂತ್ಯಾರು, ನಾಟಕ ಆಯೋಜಕರು ಮತ್ತು ಇತರ 10-15 ಜನರ ಗುಂಪು ಪೊಲೀಸರೊಂದಿಗೆ ವಾಗ್ವಾದ ನಡೆಸಿದೆ. ಈ ಸಂದರ್ಭದಲ್ಲಿ ಪೊಲೀಸರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಈ ಘಟನೆ ಸಂಬಂಧ, ಪೊಲೀಸರು ನೀಡಿದ್ದ ಸೂಚನೆಯನ್ನು ಉಲ್ಲಂಘಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಇತರ ವ್ಯಕ್ತಿಗಳ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




